
ಕಲಬುರಗಿ, ಆ.2: ನಶಾಮುಕ್ತ ಕ್ಯಾಂಪಸ್ ನಿರ್ಮಾಣಕ್ಕೆ ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಿಬ್ಬಂದಿ ಎಲ್ಲರೂ ಕೈಜೋಡಿಸಬೇಕು ಎಂದು ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಕರೆ ನೀಡಿದರು.
ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ‘ನಶಾಮುಕ್ತ ಯುವ-ವಿಕಸಿತ ಭಾರತ’ ಜಾಗೃತಿ ಅಭಿಯಾನದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವಜನರಲ್ಲಿ ಮಾದಕ ವಸ್ತುಗಳ ಸೇವನೆ ಶಿಕ್ಷಣ ಕ್ಷೇತ್ರದಷ್ಟೇ ಅಲ್ಲದೆ ಸಾಮಾಜಿಕ, ದೈಹಿಕ ಹಾಗೂ ಆರ್ಥಿಕ ಅಭಿವೃದ್ಧಿಗೂ ಗಂಭೀರ ಸವಾಲಾಗಿ ಪರಿಣಮಿಸಿದೆ. ಈ ದುಷ್ಪ್ರವೃತ್ತಿಯನ್ನು ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಪ್ರಧಾನಮಂತ್ರಿಯವರ ನಶಾಮುಕ್ತ ಭಾರತದ ಕರೆಗೆ ಸ್ಪಂದಿಸಿ ವಿಶ್ವವಿದ್ಯಾಲಯದಲ್ಲಿ ನಶಾಮುಕ್ತ ಕ್ಯಾಂಪಸ್ ನಿರ್ಮಾಣದ ಪ್ರತಿಜ್ಞೆ ಸ್ವೀಕರಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ಮಾದಕ ವಸ್ತುಗಳ ಮುಕ್ತ ದೇಶ ನಿರ್ಮಾಣ ಹಾಗೂ ಆರೋಗ್ಯಕರ ಸಮಾಜ ರೂಪಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. 2047ರ ವಿಕಸಿತ ಭಾರತದ ಕನಸನ್ನು ನನಸಾಗಿಸಲು ನಶಾಮುಕ್ತ ಸಮಾಜ ನಿರ್ಮಾಣ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಅಭಿಯಾನದ ಅಂಗವಾಗಿ ವಿಶ್ವವಿದ್ಯಾಲಯದ 2,100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ‘ಮೇರಾ ಯುವ ಭಾರತ’ ವೇದಿಕೆಯಲ್ಲಿ ನೋಂದಣಿ ಮಾಡಿಕೊಂಡಿದ್ದು, ಸ್ವಯಂಚಾಲಿತ ಪ್ರಮಾಣಪತ್ರವನ್ನೂ ಪಡೆದಿದ್ದಾರೆ ಎಂದು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ 12 ನಿಕಾಯಗಳ ಡೀನ್ಗಳು, 29 ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ನಶಾಮುಕ್ತ ಕ್ಯಾಂಪಸ್ ನಿರ್ಮಾಣದ ಸಂಕಲ್ಪ ಕೈಗೊಂಡರು.



