ಜುಲೈ 6 ಮತ್ತು 7ಕ್ಕೆ ಸಿ.ಎಂ ಕಲಬುರಗಿ ಪ್ರವಾಸ ಹಿನ್ನೆಲೆ:ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರುವಂತೆ ಡಿ.ಸಿ. ಸೂಚನೆ

ಕಲಬುರಗಿ,ಜು.4- ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಖಬುರಗಿ ವಿಂಅಗ ಮಟ್ಟದ ಇಲಾಖೆ ಒ್ರಗತಿ ಪರಿಶೀಲನೆ ನಡೆಸಲು ಇದೇ ಜುಲೈ 6 ಮತ್ತು 7 ರಂದು ಕಲಬುರಗಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ರವಿವಾರ ರಜೆ ಇದ್ದರು ಸಹ ಆಯಾ ಇಲಾಖೆಯ ಅಧಿಕಾರಿಗಳು ಸಿ.ಎಂ. ಪ್ರವಾಸ ಕಾರ್ಯಕ್ರಮ ಹಿನ್ನೆಲೆಯಲ್ಲಿ ತಮಗೆ ವಹಿಸಲಾದ ಕೆಲಸ ಕಾರ್ಯಗಳನ್ನು ರವಿವಾರ ಸಂಜೆಯೊಳಗೆ ಪೂರ್ಣಗೊಳಿಸಬೇಕು ಎಂದರು.
ಮುಖ್ಯಮಂತ್ರಿಗಳು ಜುಲೈ 6ಕ್ಕೆ ರಾತ್ರಿ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜುಲೈ 7ಕ್ಕೆ ಬೆಳಿಗ್ಗೆ ಕಲಬರಗಿ ವಿಭಾಗ ಮಟ್ಟದ ಪ್ರಗತಿ ಪರಿಶಿಲನಾ ಸಭೆ ನಡೆಸಲಿದ್ದು, ಪ್ರದೇಶದ ಸಚಿವರು, ಶಾಸಕರು, ಆಯಾ ಜಿಲ್ಲೆಗಳ ಡಿ.ಸಿ, ಎಸ್.ಪಿ., ಜಿಲ್ಲಾ ಪಂಚಾಯತ್ ಸಿ.ಇ.ಓ ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಗಣ್ಯರ ಭದ್ರತೆ ಮತ್ತು ಶಿಷ್ಠಚಾರದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಸುವಂತೆ ಸೂಚಿಸಿದರು.
ಸಿ.ಎಂ. ಪ್ರವಾಸ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಮಿತಿ ರಚಿಸಲಾಗುತ್ತಿದ್ದು, ಅಧಿಕಾರಿಗಳಿಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಸಭೆಯು ಡಿ.ಸಿ. ಕಚೇರಿ ಸಭಾಂಗಣದಲ್ಲಿ ನಡೆಯುವುದರಿಂದ ಅಂದು ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ವಿಕಾಸ ಭವನ ಆವರಣ ಸಂಪೂರ್ಣ ಸ್ವಚ್ಛಗೊಳಿಸಬೇಕು. ಬೆಂಗಳೂರಿನಿಂದ ಬರುವ ಅಧಿಕಾರಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಜೊತೆಗೆ ಸಿ.ಎಂ., ಸಚಿವರ ಹಾಗೂ ಇನ್ನಿತರ ಗಣ್ಯರ ಊಟೋಪಚಾರ, ವಸತಿ ವ್ಯವಸ್ಥೆ ಸರಿಯಾಗಿರುವಂತೆ ನೋಡಿಕೊಳ್ಳಬೇಕೆಂದ ಎಂದ ಅವರು, ಪ್ರಗತಿ ಪರಿಶೀಲನೆಗೆ ಆಯಾ ಇಲಾಖೆಯ ಮಾಹಿತಿಯನ್ನು ಕೂಡಲೆ ಡಿ.ಸಿ ಕಚೇರಿಗೆ ಸಲ್ಲಿಸಬೇಕೆಂದರು.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯತ್ ಸಿ.ಇ.ಓ ರಾಹುಲ ಸಂಕನೂರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.



