ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನ: ಆಗಸ್ಟ್ 6ರಂದು ಕಲಬುರಗಿಗೆ ಡಾ. ವಿಶ್ವಜಿತ್ ಕದಂ ಭೇಟಿ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ; ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ

ಕಲಬುರಗಿ, ಆ.5: ಕಾಂಗ್ರೆಸ್ ಪಕ್ಷದ “ಸಂಘಟನಾ ಸೃಜನ್ ಅಭಿಯಾನ” ಅಂಗವಾಗಿ ಜಿಲ್ಲೆಯ ಎಐಸಿಸಿ ಉಸ್ತುವಾರಿ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ, ಶಾಸಕ ಡಾ. ವಿಶ್ವಜಿತ್ ಕದಂ ಅವರು ಆಗಸ್ಟ್ 6ರಂದು ಕಲಬುರಗಿಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಂಘಟನಾ ಸೃಜನ್ ಅಭಿಯಾನದ ಕುರಿತು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಕಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ-ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು, ಕೆಪಿಸಿಸಿ ಮತ್ತು ಡಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು, ಡಿಸಿಸಿ ಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಎಪಿಎಂಸಿ ಸದಸ್ಯರು, ಮಹಾನಗರ ಪಾಲಿಕೆಯ ಮಾಜಿ ಹಾಗೂ ಹಾಲಿ ಸದಸ್ಯರು, ಮಹಿಳಾ ಮತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.
ಸಂಘಟನಾ ಬಲವರ್ಧನೆ ಮತ್ತು ಪಕ್ಷದ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



