ಸ್ನಾನ ಮಾಡುತ್ತಿದ್ದ ಮಹಿಳೆಯ ಮೇಲೆ ಕೊಡಲಿಯಿಂದ ಹಲ್ಲೆ; ಬರ್ಬರ ಹತ್ಯೆ, ಆಸ್ತಿ ವಿವಾದ ಶಂಕೆ
ಬೀದರ್ ಜಿಲ್ಲೆಯ ಹಾಳಗೋಟಾ ಗ್ರಾಮದಲ್ಲಿ ಘಟನೆ; ಸಂಬಂಧಿಕನ ಮೇಲೆ ಅನುಮಾನ, ಪೊಲೀಸರು ತನಿಖೆ ಆರಂಭ

ಬೀದರ್, ಜು.11: ಸ್ನಾನ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರನ್ನು ಕೊಡಲಿಯಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಾಳಗೋಟಾ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ಅನಿತಾ (32) ಎಂದು ಗುರುತಿಸಲಾಗಿದೆ. ಸಂಬಂಧಿಕನಾದ ಕೈಲಾಶ್ ವೈಜನಾಥ್ ಎಂಬಾತನೇ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕಟಕ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಆಸ್ತಿ ವಿವಾದವೇ ಕೊಲೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಮೃತ ಮಹಿಳೆಯ ಪತಿಯ ಚಿಕ್ಕಪ್ಪನ ಮಗ ಕೈಲಾಶ್ ಬಿರಾದಾರ್ ಮೇಲೂ ಆರೋಪಗಳು ಕೇಳಿಬಂದಿವೆ.
ಕೊಲೆಯ ನಿಖರ ಕಾರಣ ಹಾಗೂ ಆರೋಪಿಯ ಪಾತ್ರದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕವೇ ಸತ್ಯಾಂಶ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



