ರಾಜ್ಯ

ಮತದಾರರ ವಿಶೇಷ ಪರಿಷ್ಕರಣೆಯಲ್ಲಿ ಕಾರ್ಮಿಕರು ಕಡ್ಡಾಯವಾಗಿ ಭಾಗವಹಿಸಿ: ಬಸಲಿಂಗ ಬಿರಾದಾರ

ಮತದಾನದ ಹಕ್ಕು ಉಳಿಸಿಕೊಳ್ಳಲು ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕರೆ

ಕಲಬುರಗಿ, ಜುಲೈ ೧೩: ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಕಾರ್ಮಿಕರು ಕಡ್ಡಾಯವಾಗಿ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕ ವಿಭಾಗದ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಬಸಲಿಂಗ ಬಿರಾದಾರ ಕರೆ ನೀಡಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ಅರ್ಹ ನಾಗರಿಕರು ಹಾಗೂ ಕಾರ್ಮಿಕರು ಜಾಗೃತರಾಗಿದ್ದು, ಮತದಾರರ ಪಟ್ಟಿಯಲ್ಲಿರುವ ತಮ್ಮ ಮಾಹಿತಿಯನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಇರುವುದೇ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಆದ್ದರಿಂದ ಯಾವುದೇ ಅರ್ಹ ವ್ಯಕ್ತಿಯ ಹೆಸರು ಪಟ್ಟಿಯಿಂದ ಕೈಬಿಡದಂತೆ ಎಲ್ಲರೂ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ವಿಶೇಷ ಪರಿಷ್ಕರಣೆ ಪ್ರಕ್ರಿಯೆಗೆ ಆದ್ಯತೆ ನೀಡಿ, ನಿಗದಿತ ಅವಧಿಯೊಳಗೆ ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಸಲ್ಲಿಸಬೇಕು. ಮನೆಗಳಿಗೆ ಭೇಟಿ ನೀಡುವ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ಪರಿಶೀಲನೆಗೆ ಸಹಕರಿಸಬೇಕು ಎಂದು ಹೇಳಿದರು.

ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಅಮೂಲ್ಯ ಹಕ್ಕಾಗಿದ್ದು, ಅದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸುರಕ್ಷಿತವಾಗಿರುವಂತೆ ಖಚಿತಪಡಿಸಿಕೊಳ್ಳಬೇಕು ಎಂದು ಬಸಲಿಂಗ ಬಿರಾದಾರ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button