ಪಟ್ಟಣ ಕ್ರಾಸ್–ನಾರಾಯಣಪುರ ರಾಜ್ಯ ಹೆದ್ದಾರಿ ಕಾಮಗಾರಿ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ
ದೂರುಗಳಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪ; ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮಕ್ಕೆ ಆಗ್ರಹ

ಕಲಬುರಗಿ, ಜುಲೈ ೧೩: ಪಟ್ಟಣ ಕ್ರಾಸ್ನಿಂದ ನಾರಾಯಣಪುರ ರಾಜ್ಯ ಹೆದ್ದಾರಿಯ ಕಾಮಗಾರಿ ಸಂಬಂಧ ಹಲವು ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಲೋಕೋಪಯೋಗಿ ಇಲಾಖೆಯ ವೃತ್ತ ಅಧೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವೇದಿಕೆಯ ರಾಜ್ಯಾಧ್ಯಕ್ಷ ಶಿವಲಿಂಗ ಹಳಿಮನಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂದೀಪ್ ಭರಣಿ, ಅಂಬರೀಷ್, ವಿಶ್ವನಾಥ, ಸತೀಶ್, ರಾಯಣ್ಣ ಸೇರಿದಂತೆ ಹಲವರು ಭಾಗವಹಿಸಿದರು.
ಪ್ರತಿಭಟನೆಯ ಬಳಿಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಪಟ್ಟಣ ಕ್ರಾಸ್ನಿಂದ ನಾರಾಯಣಪುರ ರಾಜ್ಯ ಹೆದ್ದಾರಿಯ ಕಾಮಗಾರಿಯಲ್ಲಿ ಅನೇಕ ಲೋಪಗಳು ಕಂಡುಬಂದಿರುವ ಕುರಿತು ಹಲವು ಬಾರಿ ದೂರು ನೀಡಲಾಗಿದೆ. ಸ್ಥಳ ಪರಿಶೀಲನೆ ನಡೆಸಿ ಚಿತ್ರಗಳ ಮೂಲಕ ಸಾಕ್ಷ್ಯ ಒದಗಿಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಕಾಮಗಾರಿಯಲ್ಲಿನ ನಿರ್ಲಕ್ಷ್ಯದಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದರು. ಇಲಾಖೆಯಿಂದ ಮೂರು ಬಾರಿ ಸೂಚನೆ ನೀಡಲಾಗಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಕಾಮಗಾರಿ ಕುರಿತು ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಕಾಮಗಾರಿಗೆ ಸಂಬಂಧಿಸಿದ ಹಣ ಪಾವತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಸಂಬಂಧಪಟ್ಟ ಗುತ್ತಿಗೆದಾರರ ಅನುಮತಿಯನ್ನು ರದ್ದುಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.



