ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ: ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರ ನಿರಂತರ ಎಚ್ಚರಿಕೆ
ನಗರದ ವಿವಿಧ ಪ್ರಮುಖ ವೃತ್ತಗಳಲ್ಲಿ ವಿಶೇಷ ತಪಾಸಣೆ; ಹೆಲ್ಮೆಟ್, ಸೀಟ್ಬೆಲ್ಟ್, ಸಿಗ್ನಲ್ ಉಲ್ಲಂಘನೆ ಸೇರಿದಂತೆ ಸಂಚಾರ ನಿಯಮ ಪಾಲನೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ

ಕಲಬುರಗಿ, ಜು.13: ನಗರದಲ್ಲಿ ಸಂಚಾರ ಶಿಸ್ತು ಕಾಪಾಡುವ ಉದ್ದೇಶದಿಂದ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಸೋಮವಾರ ನಗರದ ವಿವಿಧ ಪ್ರಮುಖ ವೃತ್ತಗಳಿಗೆ ಭೇಟಿ ನೀಡಿ ಸಂಚಾರ ವ್ಯವಸ್ಥೆಯನ್ನು ಪರಿಶೀಲಿಸಿದರು.
ಪರಿಶೀಲನೆ ವೇಳೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸುತ್ತಿದ್ದ ಸವಾರರ ವಿರುದ್ಧ ಸ್ಥಳದಲ್ಲೇ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಯಿತು. ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು, ಸಂಚಾರ ಸಿಗ್ನಲ್ ಉಲ್ಲಂಘಿಸುವುದು, ಅಗತ್ಯ ದಾಖಲೆಗಳಿಲ್ಲದೆ ವಾಹನ ಚಾಲನೆ ಮಾಡುವುದು ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಆಯುಕ್ತರು, ರಸ್ತೆ ಅಪಘಾತಗಳನ್ನು ತಡೆಗಟ್ಟಲು ಪ್ರತಿಯೊಬ್ಬ ವಾಹನ ಸವಾರರೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು, ನಾಲ್ಕು ಚಕ್ರದ ವಾಹನ ಚಾಲಕರು ಸೀಟ್ಬೆಲ್ಟ್ ಬಳಸುವುದು, ನಿಗದಿತ ವೇಗ ಮಿತಿಯನ್ನು ಪಾಲಿಸುವುದು ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸದಂತೆ ಸಲಹೆ ನೀಡಿದರು.
ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ಹಾಗೂ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಇಂತಹ ವಿಶೇಷ ತಪಾಸಣೆ ಮತ್ತು ಕಾನೂನು ಕ್ರಮಗಳು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಮುಂದುವರಿಯಲಿವೆ ಎಂದು ಅವರು ತಿಳಿಸಿದರು.



