
ಬೀದರ್, ಜು.20: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬೀದರ್ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಡಾ. ಬಾಬಾಸಾಹೇಬ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದ್ದು, ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುಃಖಕರ ಬೆಳವಣಿಗೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಶಿಕ್ಷಣವು ರಾಜ್ಯಗಳ ವ್ಯಾಪ್ತಿಯ ವಿಷಯವಾಗಿದ್ದರೂ, ನೀಟ್ ಮೂಲಕ ರಾಜ್ಯಗಳ ಅಧಿಕಾರವನ್ನು ಕೇಂದ್ರ ಸರ್ಕಾರ ಮೊಟಕುಗೊಳಿಸಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸುಮಾರು 23 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ ಎಂದು ಹೇಳಿದರು.
ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಒಕ್ಕೂಟದ ಸದಸ್ಯರು, ಪರಿಸರ ಹೋರಾಟಗಾರ್ತಿ ಸೋನಂ ವಾಂಗ್ಚುಕ್ ಅವರನ್ನು ಪೊಲೀಸರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಿರುವ ಕ್ರಮವನ್ನೂ ಖಂಡಿಸಿದರು. ಅಲ್ಲದೆ, ಪ್ರತಿಭಟನೆಗಳನ್ನು ಹತ್ತಿಕ್ಕಲು ಪೊಲೀಸ್ ಬಲ ಬಳಸುತ್ತಿರುವುದನ್ನೂ ವಿರೋಧಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ಜೊತೆಗೆ ರಾಷ್ಟ್ರೀಯ ಮಟ್ಟದ ಅರ್ಹತಾ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ರಾಜ್ಯಗಳಿಗೆ ಮರಳಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಾಬುರಾವ್ ಹೊನ್ನಾ, ಜಗದೀಶ್ವರ ಬಿರಾದಾರ್, ಮುಬಶೀರ್ ಸಿಂದೆ, ರಾಜಕುಮಾರ್ ಮೂಲಭಾರತಿ, ಸತೀಶ್ ಬಿರಾದಾರ್, ವೈಜನಾಥ ಅಲ್ಲಾಪುರೆ, ಶಫಾಯತ್ ಅಲಿ, ಮಾರುತಿ ಬೌದ್ಧೆ, ಮಹೇಶ್ ಗೋರನಾಳಕರ, ಕೊಂಡಿಬಾರಾವ್ ಪಾಂಡ್ರೆ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.



