ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕಿ ಉಮಾಶ್ರೀ
ಸಚಿವ ಸ್ಥಾನ ಕೇಳುವುದು ನನ್ನ ಹಕ್ಕು; ಅಂತಿಮ ತೀರ್ಮಾನ ಹೈಕಮಾಂಡ್ಗೆ ಸೇರಿದ್ದು ಎಂದು ಉಮಾಶ್ರೀ ಸ್ಪಷ್ಟನೆ

ಕಲಬುರಗಿ, ಆ.1: ತಾವು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ಸಚಿವ ಸ್ಥಾನಕ್ಕಾಗಿ ಕೇಳುವುದು ತಮ್ಮ ಹಕ್ಕು ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯೆ ಹಾಗೂ ಕಾಂಗ್ರೆಸ್ ನಾಯಕಿ ಉಮಾಶ್ರೀ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ತಮ್ಮ ಅಭಿಪ್ರಾಯವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದೇನೆ. ಸಚಿವ ಸ್ಥಾನ ನೀಡುವಂತೆ ಕೇಳುವುದು ನನ್ನ ಧರ್ಮ ಮತ್ತು ಹಕ್ಕು. ಆದರೆ ಅಂತಿಮ ತೀರ್ಮಾನ ಕೈಗೊಳ್ಳುವುದು ಪಕ್ಷದ ಹೈಕಮಾಂಡ್ ಎಂದು ತಿಳಿಸಿದರು.
ಸಚಿವ ಸ್ಥಾನಕ್ಕಾಗಿ ಆಕಾಂಕ್ಷೆ ವ್ಯಕ್ತಪಡಿಸುವುದು ಸಹಜ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಪಕ್ಷದ ತೀರ್ಮಾನವೇ ಎಲ್ಲರಿಗೂ ಅಂತಿಮವಾಗಿದ್ದು, ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಕುರಿತು ಸ್ಪಷ್ಟತೆ ಸಿಗಲಿದೆ ಎಂದು ಅವರು ಹೇಳಿದರು.
ಕಾವೇರಿ ನದಿ ನೀರಿನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಮಾಶ್ರೀ, ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ಸಭೆ ಕರೆದಿದ್ದು, ರಾಜ್ಯದ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಸಿಂಗೆ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.



