ರಾಜ್ಯ

ಐದು ತಿಂಗಳ ಬಾಕಿ ಪಿಂಚಣಿ ತಕ್ಷಣ ಬಿಡುಗಡೆಗೆ ಒತ್ತಾಯ

ವೃದ್ಧರು, ಅಂಗವಿಕಲರು ಹಾಗೂ ವಿಧವೆಯರ ಸಂಕಷ್ಟ ನಿವಾರಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮನವಿ

ಕಲಬುರಗಿ, ಜು.27: ವೃದ್ಧರು, ಅಂಗವಿಕಲರು ಹಾಗೂ ವಿಧವೆಯರಿಗೆ ನೀಡಲಾಗುವ ಸಾಮಾಜಿಕ ಭದ್ರತಾ ಪಿಂಚಣಿ ಕಳೆದ ಐದು ತಿಂಗಳಿಂದ ಬಾಕಿಯಿದ್ದು, ತಕ್ಷಣವೇ ಪಿಂಚಣಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಜಿಲ್ಲಾ ಘಟಕವು ಸರ್ಕಾರವನ್ನು ಆಗ್ರಹಿಸಿದೆ.

ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ ಮನವಿಪತ್ರದಲ್ಲಿ, ಜಿಲ್ಲಾಧ್ಯಕ್ಷೆ ಗುಂಡಮ್ಮ ಮಡಿವಾಳ್, ಜಿಲ್ಲಾ ಉಪಾಧ್ಯಕ್ಷೆ ವಿಶಾಲಾಕ್ಷಿ, ಜಿಲ್ಲಾ ಕಾರ್ಯದರ್ಶಿ ಡಾ. ಸೀಮಾ ದೇಶಪಾಂಡೆ, ಕಚೇರಿ ಕಾರ್ಯದರ್ಶಿ ರಾಧಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ರಾಜ್ಯದಾದ್ಯಂತ ಸುಮಾರು 18 ಲಕ್ಷ ಪಿಂಚಣಿದಾರರು ನಾಲ್ಕು-ಐದು ತಿಂಗಳಿಂದ ಪಿಂಚಣಿ ಹಣವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ವೃದ್ಧರು, ಅಂಗವಿಕಲರು ಹಾಗೂ ವಿಧವೆಯರು ತಮ್ಮ ದೈನಂದಿನ ಜೀವನಕ್ಕಾಗಿ ಪಿಂಚಣಿಯನ್ನೇ ಅವಲಂಬಿಸಿದ್ದು, ಹಣ ಬಿಡುಗಡೆಯಲ್ಲಿ ಉಂಟಾಗಿರುವ ವಿಳಂಬದಿಂದ ಆಹಾರ, ಔಷಧೋಪಚಾರ ಮತ್ತು ಇತರೆ ಅಗತ್ಯ ವೆಚ್ಚಗಳನ್ನು ನಿರ್ವಹಿಸಲು ತೀವ್ರ ತೊಂದರೆ ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಸ್ತುತ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಸರ್ಕಾರ ನೀಡುತ್ತಿರುವ ಪಿಂಚಣಿ ಮೊತ್ತವೇ ಸಾಕಾಗದಂತಿದ್ದು, ಅದನ್ನೂ ಹಲವು ತಿಂಗಳುಗಳಿಂದ ಬಿಡುಗಡೆ ಮಾಡದಿರುವುದು ಫಲಾನುಭವಿಗಳ ಬದುಕನ್ನು ಇನ್ನಷ್ಟು ದುಸ್ತರಗೊಳಿಸಿದೆ ಎಂದು ಸಂಘಟನೆ ಆರೋಪಿಸಿದೆ.

ಸಾಮಾಜಿಕ ಭದ್ರತಾ ಯೋಜನೆಯಡಿ ಬಾಕಿ ಉಳಿದಿರುವ ಐದು ತಿಂಗಳ ಪಿಂಚಣಿ ಹಣವನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣ ಬಿಡುಗಡೆ ಮಾಡಿ, ವೃದ್ಧರು, ಅಂಗವಿಕಲರು ಹಾಗೂ ವಿಧವೆಯರ ಜೀವನೋಪಾಯಕ್ಕೆ ನೆರವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಮನವಿ ಮಾಡಿದೆ.

Related Articles

Leave a Reply

Your email address will not be published. Required fields are marked *

Back to top button