ಆಗಸ್ಟ್ 13ರಿಂದ 15ರವರೆಗೆ ‘ಘರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾದ್ಯಂತ ರಾಷ್ಟ್ರಧ್ವಜಾರೋಹಣ, ತಿರಂಗಾ ಯಾತ್ರೆ ಹಾಗೂ ಸೈನಿಕರ ಸನ್ಮಾನ

ಬೀದರ್, ಆ.3: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ಜಿಲ್ಲಾದ್ಯಂತ ‘ಘರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಭಾರತೀಯ ಜನತಾ ಪಕ್ಷ ನಿರ್ಧರಿಸಿದೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ, ಬಿಜೆಪಿ ವತಿಯಿಂದ ಜಿಲ್ಲೆಯಾದ್ಯಂತ ಮನೆ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದು ತಿಳಿಸಿದರು.
ಆಗಸ್ಟ್ 13ರಿಂದ 15ರವರೆಗೆ ಪ್ರತಿಯೊಂದು ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸುವಂತೆ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅವರು ಮನವಿ ಮಾಡಿದರು. ಆಗಸ್ಟ್ 15ರಂದು ಜಿಲ್ಲಾ ಕೇಂದ್ರದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದರು.
ಇದರ ಜೊತೆಗೆ ಆಗಸ್ಟ್ 14ರಂದು ವಿಭಜನೆ ವಿಭೀಷಿಕಾ ಸ್ಮೃತಿ ದಿನವನ್ನು ಆಚರಿಸಲಾಗುವುದು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ಹುತಾತ್ಮ ಪೊಲೀಸ್ ಸಿಬ್ಬಂದಿ, ಮಾಜಿ ಸೈನಿಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರನ್ನು ಪಕ್ಷದ ವತಿಯಿಂದ ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಾಬುವಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ ಪಾಟೀಲ, ಪೀರಪ್ಪ ಓರಾದೆ, ಉಪಾಧ್ಯಕ್ಷರಾದ ವಿಜಯಕುಮಾರ ಪಾಟೀಲ ಗಾದಗಿ, ಅಶೋಕ ಹೊಕ್ರಾಣೆ, ಕಾರ್ಯದರ್ಶಿ ಮಹೇಶ್ವರ ಸ್ವಾಮಿ, ಸುಭಾಷ್ ಮಡಿವಾಳ, ರಾಜಕುಮಾರ ಪಾಟೀಲ ನೇವಮತಾಬಾದ್, ಸೂರ್ಯಕಾಂತ ಚಿಲ್ಲಾಭಟ್ಟೆ, ಶ್ರೀಮತಿ ಲುಂಬಾಣಿ ಗೌತಮ್, ಮಹಾನಂದ ಪಾಟೀಲ, ಗೋವಿಂದ ಬಿರಾದಾರ, ಸಂಗಮೇಶ ನಾಸಿಗಾರ್, ಶಶಿ ಹೊಸಳ್ಳಿ, ದೀಪಕ್ ಗಾದಗೆ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



