ಚಿತ್ತಾಪುರ ಸಾರ್ವಜನಿಕ ಆಸ್ಪತ್ರೆಗೆ ಡಿಎಂಎಫ್ನಿಂದ ನೂತನ ಅಂಬುಲೆನ್ಸ್ ಸೇವೆ
ಡಿಎಚ್ಒ ಡಾ. ಶರಣಬಸಪ್ಪ ಕ್ಯಾತನಾಳ ಚಾಲನೆ; ತುರ್ತು ವೈದ್ಯಕೀಯ ಸೇವೆಗೆ ಮತ್ತಷ್ಟು ಬಲ

ಕಲಬುರಗಿ, ಜು. 31: ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ಕಲಬುರಗಿ ವತಿಯಿಂದ ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ನೀಡಲಾದ ನೂತನ ಅಂಬುಲೆನ್ಸ್ಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್ಒ) ಡಾ. ಶರಣಬಸಪ್ಪ ಕ್ಯಾತನಾಳ ಶುಕ್ರವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಸಾರ್ವಜನಿಕರಿಗೆ ತುರ್ತು ವೈದ್ಯಕೀಯ ಸೇವೆಯನ್ನು ತ್ವರಿತವಾಗಿ ತಲುಪಿಸುವಲ್ಲಿ ಅಂಬುಲೆನ್ಸ್ ಪ್ರಮುಖ ಪಾತ್ರ ವಹಿಸುತ್ತದೆ. ಚಿತ್ತಾಪುರ ಭಾಗದ ರೋಗಿಗಳನ್ನು ಅಗತ್ಯವಿದ್ದಾಗ ಉನ್ನತ ಚಿಕಿತ್ಸಾ ಕೇಂದ್ರಗಳಿಗೆ ಸುರಕ್ಷಿತವಾಗಿ ಮತ್ತು ಸಮಯೋಚಿತವಾಗಿ ಸಾಗಿಸಲು ಈ ವಾಹನ ನೆರವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಖನಿಜ ಪ್ರತಿಷ್ಠಾನದ ಸಹಕಾರದಿಂದ ಆರೋಗ್ಯ ಇಲಾಖೆಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಈ ಅಂಬುಲೆನ್ಸ್ ಸೇವೆ ಮಹತ್ವದ ಕೊಡುಗೆಯಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರವಿಕಾಂತಿ ಕ್ಯಾತನಾಳ, ಕಲಬುರಗಿ ತಾಲೂಕು ಆರೋಗ್ಯಾಧಿಕಾರಿ ಡಾ. ವೀರನಾಥ, ಸಹಾಯಕ ಆಡಳಿತಾಧಿಕಾರಿ ಪಿ.ಪಿ. ನಾಯಕ್, ಕಚೇರಿ ಅಧೀಕ್ಷಕರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.



