ರುದ್ರಪ್ಪ ಲಮಾಣಿ ಸಚಿವರಾಗಿದ್ದಕ್ಕೆ ಚಿತ್ತಾಪುರದಲ್ಲಿ ಬಂಜಾರ ಸಮುದಾಯದ ಸಂಭ್ರಮಾಚರಣೆ
ಸಿಹಿ ಹಂಚಿ ವಿಜಯೋತ್ಸವ ಆಚರಣೆ; ಸಮುದಾಯಕ್ಕೆ ನ್ಯಾಯ ದೊರೆತಿದೆ ಎಂದು ಮುಖಂಡರ ಸಂತಸ

ಚಿತ್ತಾಪುರ, ಆ.5: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಲಂಬಾಣಿ ಸಮುದಾಯದ ಏಕೈಕ ಶಾಸಕರಾದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಬಂಜಾರ ಸಮುದಾಯದ ವತಿಯಿಂದ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ್ ಮಾತನಾಡಿ, ಲಂಬಾಣಿ ಸಮುದಾಯದ ಏಕೈಕ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಈ ಹಿಂದೆ ಉಪಸಭಾಪತಿ ಸ್ಥಾನ ನೀಡಲಾಗಿತ್ತು. ಇದೀಗ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಬಂಜಾರ ಸಮುದಾಯಕ್ಕೆ ನ್ಯಾಯ ಒದಗಿಸಲಾಗಿದೆ ಎಂದು ಹೇಳಿದರು.
ಸಮುದಾಯದ ಪರವಾಗಿ ಸಚಿವ ಸ್ಥಾನ ನೀಡಿದ ರಾಜ್ಯ ಸರ್ಕಾರಕ್ಕೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರುಗಳಿಗೆ ಕೃತಜ್ಞತೆ ಸಲ್ಲಿಸಿದರು.
ರುದ್ರಪ್ಪ ಲಮಾಣಿ ಅವರ ಸಚಿವ ಸಂಪುಟ ಸೇರ್ಪಡೆಯಿಂದ ಬಂಜಾರ ಸಮುದಾಯಕ್ಕೆ ಇನ್ನಷ್ಟು ಅಭಿವೃದ್ಧಿ ಅವಕಾಶಗಳು ದೊರೆಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಈ ನೇಮಕಾತಿಯಿಂದ ಸಮುದಾಯದ ಜನರಲ್ಲಿ ಹೊಸ ಉತ್ಸಾಹ ಮೂಡಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಂಜಾರ ಸಮುದಾಯದ ಮುಖಂಡರಾದ ಕಿಶನ್ ನಾಯಕ್, ಲಕ್ಷ್ಮಣ ನಾಯಕ್, ಕಿರಣ್ ನಾಯಕ್, ಕಿಶನ್ ಚವ್ಹಾಣ್, ಕುಮಾರ್ ಜಾಧವ್ ಸೇರಿದಂತೆ ಹಲವರು ಭಾಗವಹಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.



