ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಯೋಜನೆ ಮಂಜೂರಾತಿಗೆ ಕೇಂದ್ರ ಸಚಿವರಿಗೆ ಸಂಸದರ ನಿಯೋಗ ಮನವಿ
ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಹಾಗೂ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡುವಂತೆ ಮನವಿ

ಕಲಬುರಗಿ, ಆ.11: ಕಲ್ಯಾಣ ಕರ್ನಾಟಕದ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಜನ ವಿಕಾಸ ಕಾರ್ಯಕ್ರಮದಡಿ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಮಂಜೂರು ಮಾಡುವಂತೆ ಆಗ್ರಹಿಸಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ನೇತೃತ್ವದ ಕಲ್ಯಾಣ ಕರ್ನಾಟಕದ ಸಂಸದರ ನಿಯೋಗ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಕಲ್ಯಾಣ ಕರ್ನಾಟಕ ಐತಿಹಾಸಿಕವಾಗಿ ಹಿಂದುಳಿದ ಪ್ರದೇಶವಾಗಿದ್ದು, ಸಂವಿಧಾನದ 371(ಜೆ) ವಿಧಿಯಡಿ ವಿಶೇಷ ಸಾಂವಿಧಾನಿಕ ಸ್ಥಾನಮಾನ ಹೊಂದಿದೆ. ಈ ಹಿನ್ನೆಲೆಯಲ್ಲಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ವಿಶೇಷ ಅಭಿವೃದ್ಧಿ ಉಪಕ್ರಮಗಳ ಅಗತ್ಯವಿದೆ ಎಂದು ನಿಯೋಗ ಸಚಿವರ ಗಮನಕ್ಕೆ ತಂದಿತು.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರಧಾನಮಂತ್ರಿ ಜನ ವಿಕಾಸ ಕಾರ್ಯಕ್ರಮದಡಿ ಅಗತ್ಯ ನೆರವು ಒದಗಿಸುವಂತೆ ಸಂಸದರು ಮನವಿ ಮಾಡಿದರು.
ಪ್ರಸ್ತಾವಿತ ಯೋಜನೆಗಳಲ್ಲಿ ಶಾಲಾ ಕಟ್ಟಡಗಳು, ಹೆಚ್ಚುವರಿ ತರಗತಿ ಕೊಠಡಿಗಳು, ವಸತಿ ನಿಲಯಗಳು, ಐಟಿಐಗಳು, ಪಾಲಿಟೆಕ್ನಿಕ್ಗಳು ಹಾಗೂ ಕೌಶಲ್ಯಾಭಿವೃದ್ಧಿ ಕೇಂದ್ರಗಳ ಸ್ಥಾಪನೆಗೆ ಆದ್ಯತೆ ನೀಡುವಂತೆ ಕೋರಲಾಗಿದೆ. ಇದರ ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಯಿ-ಮಕ್ಕಳ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಯೋಜನೆಗಳನ್ನೂ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
ಕುಡಿಯುವ ನೀರು, ರಸ್ತೆ, ನೈರ್ಮಲ್ಯ, ಸಮುದಾಯ ಭವನಗಳು ಹಾಗೂ ಅಂಗನವಾಡಿ ಕೇಂದ್ರಗಳ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೂ ಯೋಜನೆಯಡಿ ನೆರವು ನೀಡಬೇಕು ಎಂದು ನಿಯೋಗ ಒತ್ತಾಯಿಸಿತು. ವೃತ್ತಿಪರ ತರಬೇತಿ, ಉದ್ಯಮಶೀಲತೆ ಹಾಗೂ ಮಹಿಳೆಯರು ಮತ್ತು ಯುವಕರಿಗಾಗಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವನ್ನೂ ಸಚಿವರ ಗಮನಕ್ಕೆ ತರಲಾಯಿತು.
ಪ್ರಸ್ತಾವನೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ಅರ್ಹ ಯೋಜನೆಗಳಿಗೆ ಪ್ರಧಾನಮಂತ್ರಿ ಜನ ವಿಕಾಸ ಕಾರ್ಯಕ್ರಮದಡಿ ಆರ್ಥಿಕ ನೆರವು ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಂಸದರು ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು ವಿನಂತಿಸಿದರು. ಯೋಜನೆಗಳು ಅನುಷ್ಠಾನಗೊಂಡರೆ ಕಲ್ಯಾಣ ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯಗಳ ಶಿಕ್ಷಣ, ಆರೋಗ್ಯ, ಉದ್ಯೋಗಾವಕಾಶಗಳು ಹಾಗೂ ಅಗತ್ಯ ನಾಗರಿಕ ಸೌಲಭ್ಯಗಳು ಗಣನೀಯವಾಗಿ ಸುಧಾರಿಸಲಿವೆ ಎಂದು ನಿಯೋಗ ವಿಶ್ವಾಸ ವ್ಯಕ್ತಪಡಿಸಿತು.
ನಿಯೋಗದಲ್ಲಿ ರಾಯಚೂರು ಸಂಸದ ಜಿ. ಕುಮಾರ್ ನಾಯಕ, ಬಳ್ಳಾರಿ ಸಂಸದ ಇ. ತುಕಾರಾಂ, ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ್ ಹಾಗೂ ದಾವಣಗೆರೆ ಸಂಸದೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ ಸೇರಿದಂತೆ ಹಲವರು ಉಪಸ್ಥಿತರಿದ್ದರು.



