ಜಿಲ್ಲಾಸುದ್ದಿ

ಬರಪೀಡಿತ ಗ್ರಾಮಗಳಿಗೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಭೇಟಿ; ರೈತರ ಸಮಸ್ಯೆ ಆಲಿಕೆ

ಬೆಳೆಹಾನಿ ಪರಿಶೀಲನೆಗೆ ಅಧಿಕಾರಿಗಳಿಗೆ ಸೂಚನೆ – ಸ್ಥಳದಲ್ಲೇ ರೈತರೊಂದಿಗೆ ಸಂವಾದ

ಯಾದಗಿರಿ, ಆ.6: ಜಿಲ್ಲೆಯ ಶಹಾಪುರ ಮತಕ್ಷೇತ್ರದ ಮೂಡಭೂಳ, ಸೈದಾಪುರ ಹಾಗೂ ರಸ್ತಾಪುರ ಗ್ರಾಮಗಳಿಗೆ ರಾಜ್ಯ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಗುರುವಾರ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರು ಸ್ಥಳದಲ್ಲೇ ರೈತರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳು ಹಾಗೂ ಸಂಕಷ್ಟಗಳನ್ನು ಆಲಿಸಿದರು. ಬೆಳೆ ನಷ್ಟ, ಮಳೆಯ ಕೊರತೆ ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಪರಿಣಾಮಗಳ ಕುರಿತು ರೈತರಿಂದ ಮಾಹಿತಿ ಪಡೆದು, ಸಂಬಂಧಿಸಿದ ಕೃಷಿ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಶಹಾಪುರ ತಾಲ್ಲೂಕಿನ ಪ್ರಮುಖ ಬೆಳೆಗಳ ಹಾನಿ ಹಾಗೂ ಮಳೆ ಕೊರತೆಯಿಂದ ಉಂಟಾದ ನಷ್ಟದ ಕುರಿತು ಸಮಗ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು, ರೈತರಿಗೆ ಅಗತ್ಯ ನೆರವು ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಈ ವೇಳೆ ರೈತರು ಬೆಳೆಗಳು ಮಳೆಯ ಅಭಾವದಿಂದ ತೀವ್ರ ಹಾನಿಗೊಳಗಾಗಿರುವುದನ್ನು ಸಚಿವರ ಗಮನಕ್ಕೆ ತಂದು, ಶೀಘ್ರ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button