ಅಪರಾಧ

ಪೊಲೀಸ್ ವೇಷದಲ್ಲಿ ಕಳ್ಳತನ: 18 ಮಂದಿ ಬಂಧನ; 10 ಪ್ರಕರಣಗಳಲ್ಲಿ ₹42.66 ಲಕ್ಷ ಮೌಲ್ಯದ ಆಸ್ತಿ ಜಪ್ತಿ

ಜ್ಯೋತಿಷಿಯಂತೆ ನಟಿಸಿ ಚಿನ್ನಾಭರಣ ದೋಚಿದ ಪ್ರಕರಣವೂ ಪತ್ತೆ; ನರೋಣಾ ಕಳ್ಳತನ ಪ್ರಕರಣದಲ್ಲಿ ಆರೋಪಿ ಬಂಧನ

ಕಲಬುರಗಿ, ಆ.18: ಪೊಲೀಸ್ ಅಧಿಕಾರಿಗಳಂತೆ ನಟಿಸಿ ವಂಚನೆ ನಡೆಸುತ್ತಿದ್ದ ಪ್ರಕರಣ ಸೇರಿದಂತೆ ವಿವಿಧ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿರುವ ಕಲಬುರಗಿ ಜಿಲ್ಲಾ ಪೊಲೀಸರು, ಒಟ್ಟು 10 ಪ್ರಕರಣಗಳಲ್ಲಿ 18 ಆರೋಪಿಗಳನ್ನು ಬಂಧಿಸಿ ₹42.66 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಾಗೂ ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ಪೊಲೀಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಳಂದ ತಾಲೂಕಿನ ನರೋಣಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು, ಶಹಾಬಾದ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು, ವಾಡಿ ಠಾಣೆ ವ್ಯಾಪ್ತಿಯಲ್ಲಿ ಮೂರು ಹಾಗೂ ಚಿತ್ತಾಪುರ ಮತ್ತು ಮಾಡಬೂಳ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 10 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 18 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಬಂಧಿತರಿಂದ ಚಿನ್ನಾಭರಣ, ನಗದು ಹಾಗೂ ಬೈಕ್‌ಗಳು ಸೇರಿದಂತೆ ಒಟ್ಟು ₹42.66 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಲು ಹೇಳಿದರು.

ನರೋಣಾ ಕಳ್ಳತನ ಪ್ರಕರಣ ಪತ್ತೆ

ಅಳಂದ ತಾಲೂಕಿನ ನರೋಣಾ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನಳ್ಳಿ ಗ್ರಾಮದಲ್ಲಿ ಮನೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮನೆಯ ಮಾಲೀಕರ ಮನೆಯಲ್ಲೇ ₹26.81 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಮುನ್ನಳ್ಳಿ ಗ್ರಾಮದ ಜಯಶ್ರೀ ಶಾಂಭವಿ ಅವರ ಮನೆಯಲ್ಲಿ ಸುಮಾರು 160 ಗ್ರಾಂ ಚಿನ್ನಾಭರಣ ಹಾಗೂ ₹7 ಲಕ್ಷ ನಗದು ಕಳವು ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ನರೋಣಾ ಪೊಲೀಸರು ತನಿಖೆ ಕೈಗೊಂಡಿದ್ದರು.

ಕಳ್ಳತನ ನಡೆದ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಸಾಕ್ಷ್ಯಗಳು ಲಭ್ಯವಿಲ್ಲದಿದ್ದರೂ, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿಯ ಸುಳಿವು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಿವಾಸಲು ತಿಳಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ನಿವಾಸಿ ಹಾಗೂ ಜಯಶ್ರೀ ಶಾಂಭವಿ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ, ಮೂರು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ 31 ವರ್ಷದ ಮಚ್ಚೇಂದ್ರ ಪೂಜಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಆರೋಪಿಯಿಂದ ಕಳವು ಮಾಡಲಾಗಿದ್ದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ್, ಶಹಾಬಾದ್ ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಅಳಂದ ಡಿವೈಎಸ್‌ಪಿ ತಮ್ಮರಾಯ ಪಾಟೀಲ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button