ಗ್ರಾಮೀಣ ಮನೆ ಮನೆಗೆ ಕಾನೂನು ಅರಿವಿನ ಜ್ಯೋತಿ ಪ್ರಜ್ವಲಿಸಲಿ: ಅಟ್ಟೂರ್
28 ಗ್ರಾಮ ಪಂಚಾಯಿತಿಗಳಲ್ಲಿ ವಕೀಲರ ನೇಮಕ; ಗ್ರಾಮೀಣ ಜನರಿಗೆ ಕಾನೂನು ಅರಿವು ಮೂಡಿಸಲು ಕಾರ್ಯಕ್ರಮ

ಕಲಬುರಗಿ, ಆ. 19: ಗ್ರಾಮೀಣ ಮಟ್ಟದಲ್ಲಿ ಜನರಿಗೆ ಕಾನೂನಿನ ಕುರಿತು ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯ 28 ಗ್ರಾಮ ಪಂಚಾಯಿತಿಗಳಲ್ಲಿ ಒಬ್ಬೊಬ್ಬ ವಕೀಲರನ್ನು ನೇಮಕ ಮಾಡಲಾಗಿದ್ದು, ಅವರ ಮೂಲಕ ಕಾನೂನು ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ಯಾನಲ್ ವಕೀಲ ಹನಮಂತರಾಯ ಅಟ್ಟೂರ್ ಹೇಳಿದರು.
ಆಳಗೂಡ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಪ್ರತಿಯೊಬ್ಬರ ಮನೆ, ಮನೆಯನ್ನು ಕಾನೂನಿನ ಜ್ಯೋತಿಯಿಂದ ಬೆಳಗಿಸುವ ಉದ್ದೇಶದಿಂದ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದರು.
ಕಾನೂನಿನ ಅರಿವು ಪ್ರತಿಯೊಬ್ಬ ನಾಗರಿಕನಿಗೂ ಅಗತ್ಯ. ಕಾನೂನು ತಿಳುವಳಿಕೆ ಹೊಂದಿರುವುದರಿಂದ ಜನರು ತಮ್ಮ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಅರಿತುಕೊಳ್ಳುವುದರ ಜೊತೆಗೆ, ಸಮಸ್ಯೆಗಳು ಎದುರಾದಾಗ ಸೂಕ್ತ ಕಾನೂನು ನೆರವು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಗ್ರಾಮೀಣ ಭಾಗದ ಜನರಿಗೆ ಕಾನೂನು ಸೇವೆಗಳು ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಕೀಲರನ್ನು ನೇಮಕ ಮಾಡಲಾಗಿದೆ. ಸಾರ್ವಜನಿಕರು ತಮ್ಮ ಕಾನೂನು ಸಮಸ್ಯೆಗಳಿಗೆ ವಕೀಲರ ಮೂಲಕ ಸೂಕ್ತ ಮಾರ್ಗದರ್ಶನ ಹಾಗೂ ನೆರವು ಪಡೆದುಕೊಳ್ಳಬೇಕು ಎಂದು ಹನಮಂತರಾಯ ಅಟ್ಟೂರ್ ಸಲಹೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಮಾಜದ ಎಲ್ಲ ವರ್ಗದ ಜನರಿಗೆ ಕಾನೂನು ಅರಿವು ಮತ್ತು ನೆರವು ಒದಗಿಸುವ ಮೂಲಕ ನ್ಯಾಯವನ್ನು ಎಲ್ಲರಿಗೂ ತಲುಪಿಸುವ ಕಾರ್ಯ ಮಾಡುತ್ತಿದೆ. ಮನೆ ಮನೆಗೂ ಕಾನೂನಿನ ಜ್ಯೋತಿ ತಲುಪಿ, ಪ್ರತಿಯೊಬ್ಬರ ಬದುಕು ಬೆಳಕಾಗಬೇಕು ಎಂಬ ಸಂಕಲ್ಪದೊಂದಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಗುರುಗಳಾದ ಮೀನಾಕ್ಷಿ ಗುಂಡುಗುರ್ತಿ, ಶಿಕ್ಷಕರಾದ ಅನ್ನಪೂರ್ಣ ಮೂಡಬಿ, ಅನಸೂಯಾ ಎಚ್., ಗುಂಡಮ್ಮ ಸೂಗೂರ್, ಸುರೇಖಾ ವರ್ಮಾ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು.



