ಮಂಗಳೂರು–ಮೈಸೂರು ರೈಲ್ವೆ ವಿಭಾಗಕ್ಕೆ ಸೇರ್ಪಡೆಗೆ ಸಂತಸ
ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನು ನೈಋತ್ಯ ರೈಲ್ವೆ ವಲಯಕ್ಕೆ ಸೇರಿಸಲು ಬಿಜೆಪಿ ನಾಯಕಿ ಡಾ. ಸುಧಾ ಆರ್. ಹಾಲಕೆ ಆಗ್ರಹ

ಕಲಬುರಗಿ, ಆ.25: ಮಂಗಳೂರು ಭಾಗವನ್ನು ಮೈಸೂರು ರೈಲ್ವೆ ವಿಭಾಗಕ್ಕೆ ಸೇರ್ಪಡೆಗೊಳಿಸುವ ಮೂಲಕ ಕೇಂದ್ರ ಸರ್ಕಾರ ಐತಿಹಾಸಿಕ ಹಾಗೂ ದಿಟ್ಟ ನಿರ್ಧಾರ ಕೈಗೊಂಡಿದೆ. ಇದೇ ಮಾದರಿಯಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳನ್ನು ನೈಋತ್ಯ ರೈಲ್ವೆ ವಲಯಕ್ಕೆ ಸೇರ್ಪಡೆಗೊಳಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರೆ ಡಾ. ಸುಧಾ ಆರ್. ಹಾಲಕೆ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದರಾದ ಬ್ರಿಜೇಶ್ ಚೌಟ, ಶ್ರೀನಿವಾಸ ಪೂಜಾರಿ ಸೇರಿದಂತೆ ಕರಾವಳಿ ಭಾಗದ ಜನಪ್ರತಿನಿಧಿಗಳು ನಡೆಸಿದ ಹೋರಾಟದ ಫಲವಾಗಿ ಮಂಗಳೂರು ಭಾಗವು ಮೈಸೂರು ರೈಲ್ವೆ ವಿಭಾಗಕ್ಕೆ ಸೇರ್ಪಡೆಯಾಗಿದೆ. ಇದಕ್ಕಾಗಿ ಹೋರಾಟಗಾರರು ಹಾಗೂ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ಮತ್ತು ವಿ. ಸೋಮಣ್ಣ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಈ ಹಿಂದೆ ಮಂಗಳೂರು ಭಾಗವನ್ನು ಪಾಲಕ್ಕಾಡ್ ರೈಲ್ವೆ ವಿಭಾಗಕ್ಕೆ ಸೇರಿಸಲಾಗಿತ್ತು. ಇದರಿಂದ ಈ ಭಾಗದ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದ ಹಲವು ನಿರ್ಧಾರಗಳು ಪಾಲಕ್ಕಾಡ್ ಹಾಗೂ ಕೊಂಕಣ ರೈಲ್ವೆ ಸೇರಿದಂತೆ ವಿವಿಧ ವ್ಯವಸ್ಥೆಗಳ ನಡುವೆ ಸಿಲುಕಿಕೊಂಡು ಅಭಿವೃದ್ಧಿಯ ವೇಗಕ್ಕೆ ತೊಡಕಾಗಿತ್ತು. ಇದೀಗ ಮಂಗಳೂರು ಭಾಗವನ್ನು ಮೈಸೂರು ವಿಭಾಗಕ್ಕೆ ಸೇರಿಸಿರುವುದರಿಂದ ಕರ್ನಾಟಕದ ರೈಲ್ವೆ ಸಂಪರ್ಕ ಹಾಗೂ ಒಟ್ಟಾರೆ ಅಭಿವೃದ್ಧಿಗೆ ಹೊಸ ಅವಕಾಶಗಳು ತೆರೆದುಕೊಂಡಿವೆ ಎಂದರು.
ಬೆಂಗಳೂರು–ಮೈಸೂರು–ಮಂಗಳೂರು ಮಾರ್ಗದ ಜೊತೆಗೆ ಉಡುಪಿ, ಕಾರವಾರ ಸೇರಿದಂತೆ ಕರಾವಳಿ ಭಾಗಗಳಿಗೆ ಹೆಚ್ಚಿನ ರೈಲು ಸೇವೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೊಸ ರೈಲು ಯೋಜನೆಗಳಿಗೆ ವೇಗ ದೊರೆಯುವ ನಿರೀಕ್ಷೆಯಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಮಂಗಳೂರು ಭಾಗದ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಹಾಗೂ ಬದ್ಧತೆಯಿಂದ ಹೋರಾಟ ನಡೆಸಿ ಈ ಸಾಧನೆ ಮಾಡಿರುವುದು ಎಲ್ಲರಿಗೂ ಮಾದರಿಯಾಗಿದೆ. ಇದೇ ರೀತಿಯ ಒಗ್ಗಟ್ಟು ಕಲ್ಯಾಣ ಕರ್ನಾಟಕಕ್ಕೂ ಅಗತ್ಯವಿದೆ. ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳು ರೈಲ್ವೆ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯ ಪ್ರಾಮುಖ್ಯತೆ ಪಡೆಯುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಈ ಭಾಗದಿಂದ ರೈಲುಗಳ ಸಂಚಾರ, ಪ್ರಯಾಣಿಕರ ಸಂಖ್ಯೆ ಹಾಗೂ ರೈಲ್ವೆಗೆ ಸಂಬಂಧಿಸಿದ ಆದಾಯ ಸಾಕಷ್ಟಿದ್ದರೂ, ಅದಕ್ಕೆ ತಕ್ಕಂತೆ ಹೊಸ ರೈಲುಗಳು, ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳು ದೊರೆಯುತ್ತಿಲ್ಲ. ಆದ್ದರಿಂದ ಮಂಗಳೂರು ಭಾಗವನ್ನು ಮೈಸೂರು ರೈಲ್ವೆ ವಿಭಾಗಕ್ಕೆ ಸೇರಿಸಿದ ಮಾದರಿಯಲ್ಲಿ ಕಲಬುರಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳನ್ನು ಪ್ರತ್ಯೇಕ ರೈಲ್ವೆ ವಿಭಾಗವನ್ನಾಗಿ ಮಾಡಿ ನೈಋತ್ಯ ರೈಲ್ವೆ ವಲಯದ ಅಡಿಯಲ್ಲಿ ತರಬೇಕು ಎಂದು ಆಗ್ರಹಿಸಿದರು.
ಕಲ್ಯಾಣ ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ತಕ್ಷಣ ಸಮಗ್ರ ಯೋಜನೆ ಸಿದ್ಧಪಡಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಎಲ್ಲ ರಾಜಕೀಯ ಪಕ್ಷಗಳನ್ನು ಒಗ್ಗೂಡಿಸಿ ಕೇಂದ್ರ ಸರ್ಕಾರದೊಂದಿಗೆ ನಿರಂತರವಾಗಿ ಚರ್ಚಿಸಿ ಯೋಜನೆಯನ್ನು ಕಾರ್ಯರೂಪಕ್ಕೆ ತರಬೇಕು ಎಂದು ಅವರು ಒತ್ತಾಯಿಸಿದರು.
ರೈಲ್ವೆ ಸಂಪರ್ಕವು ಕೇವಲ ಪ್ರಯಾಣದ ವ್ಯವಸ್ಥೆಯಲ್ಲ. ಕೈಗಾರಿಕೆ, ಶಿಕ್ಷಣ, ಆರೋಗ್ಯ, ವ್ಯಾಪಾರ, ಉದ್ಯೋಗ, ಕೃಷಿ ಹಾಗೂ ಪ್ರವಾಸೋದ್ಯಮ ಸೇರಿದಂತೆ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಅದು ಪ್ರಮುಖ ಆಧಾರವಾಗಿದೆ. ಹೀಗಾಗಿ ಕಲ್ಯಾಣ ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ತಕ್ಷಣ ಸಮಗ್ರ ಕಾರ್ಯಯೋಜನೆ ರೂಪಿಸಬೇಕು ಎಂದು ಹೇಳಿದರು.
ಅಲ್ಲದೆ, ಕಲಬುರಗಿ–ಬೆಂಗಳೂರು ಹೆದ್ದಾರಿಯನ್ನು ನಾಲ್ಕು ಅಥವಾ ಆರು ಪಥಕ್ಕೆ ವಿಸ್ತರಿಸುವ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಸೇರಿದಂತೆ ಪೂರ್ವಸಿದ್ಧತಾ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳಬೇಕು. ಈ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ತ್ವರಿತಗೊಳಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಅವರು ಆಗ್ರಹಿಸಿದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಮಂಡಳಿಗೆ ವಿಶೇಷ ಜವಾಬ್ದಾರಿ ಇದೆ. ಕಲಬುರಗಿ–ಬೆಂಗಳೂರು ಹೆದ್ದಾರಿ ವಿಸ್ತರಣೆಯನ್ನು ಅತ್ಯಂತ ಆದ್ಯತೆಯ ಯೋಜನೆಯಾಗಿ ಪರಿಗಣಿಸಿ, ತಕ್ಷಣ ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು. ಇದು ಕೇವಲ ರಸ್ತೆ ನಿರ್ಮಾಣದ ಯೋಜನೆಯಲ್ಲ; ಕಲ್ಯಾಣ ಕರ್ನಾಟಕವನ್ನು ರಾಜ್ಯದ ರಾಜಧಾನಿ ಬೆಂಗಳೂರಿನೊಂದಿಗೆ ವೇಗವಾಗಿ, ಸುರಕ್ಷಿತವಾಗಿ ಹಾಗೂ ಪರಿಣಾಮಕಾರಿಯಾಗಿ ಸಂಪರ್ಕಿಸುವ ಮಹತ್ವದ ಅಭಿವೃದ್ಧಿ ಯೋಜನೆಯಾಗಿದೆ ಎಂದು ಡಾ. ಸುಧಾ ಹಾಲಕೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಒಬಿಸಿ ಅಧ್ಯಕ್ಷ ದೇವೇಂದ್ರಪ್ಪ ದೇಸಾಯಿ ಕಲ್ಲೂರ್, ಗಿರಿರಾಜ್ ಎಸ್. ಯಳಮೇಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



