ಆಳಂದ್ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ರದ್ದತಿಗೆ ಹೈಕೋರ್ಟ್ ಮಧ್ಯಂತರ ತಡೆ:ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ..!

ಕಲಬುರ್ಗಿ, ಜು.೨- ಜಿಲ್ಲೆಯ ಆಳಂದ ಪಟ್ಟಣದಲ್ಲಿನ ವಿವಾದಾತ್ಮಕ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘಚೈತನ್ಯರ ಶಿವಲಿಂಗಕ್ಕೆ ಪೂಜೆ ಸಂದರ್ಭದಲ್ಲಿ ನಡೆದ ಗಲಭೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದುಕೊAಡಿದ್ದಕ್ಕೆ ರಾಜ್ಯದ ಉಚ್ಛ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ.
ಕರ್ನಾಟಕ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿರುವ ಬೆಳವಣಿಗೆಯೊಂದರಲ್ಲಿ, ೫೨ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಇದೇ ರೀತಿಯ ಅಧಿಸೂಚನೆಯೊಂದನ್ನು ಈ ಹಿಂದೆ ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪಿಗೆ ಸರ್ಕಾರದ ಈ ಆದೇಶವು ಮೇಲ್ನೋಟಕ್ಕೆ ವಿರುದ್ಧವಾಗಿದೆ ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
ಹಿಂಪಡೆಯಲು ಉದ್ದೇಶಿಸಲಾಗಿದ್ದ ಪ್ರಕರಣಗಳಲ್ಲಿ ಆಳಂದ್ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಮತ್ತು ಜಿಲ್ಲೆಯ ಹಲವು ಕೋಮು ಗಲಭೆ ಪ್ರಕರಣಗಳು ಸೇರಿವೆ. ಹಿಂದಿನ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರ ಶಿಫಾರಸ್ಸುಗಳ ಆಧಾರದ ಮೇಲೆ ಕಳೆದ ಮೇ ೨೭ರಂದು ಹೊರಡಿಸಲಾದ ಸರ್ಕಾರದ ಆದೇಶದ ಮೂಲಕ ಈ ಪ್ರಕರಣಗಳನ್ನು ಹಿಂಪಡೆಯುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.
ಮುಖ್ಯ ನ್ಯಾಯಮೂರ್ತಿ ವಿಬು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿ, ಗೃಹ ಇಲಾಖೆ ಮತ್ತು ಪ್ರಾಸಿಕ್ಯೂಷನ್ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿ, ಎರಡು ವಾರಗಳಲ್ಲಿ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಆದಾಗ್ಯೂ, ಅರ್ಜಿಯಲ್ಲಿ ಹಿಂದಿನ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಮಾಡಲಾದ ಆರೋಪಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಅವರಿಗೆ ನೋಟಿಸ್ ಜಾರಿ ಮಾಡಲಿಲ್ಲ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸರ್ಕಾರದ ನಿರ್ಧಾರವನ್ನು ಪ್ರಶ್ನಿಸುತ್ತದೆ. ಗಿರೀಶ್ ಭಾರದ್ವಾಜ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ವಿಚಾರಣೆಯ ಸಂದರ್ಭದಲ್ಲಿ ಮಧ್ಯಂತರ ಆದೇಶ ಬಂದಿದೆ. ಅರ್ಜಿದಾರರ ಪರವಾಗಿ ಹಾಜರಾದ ನ್ಯಾಯವಾದಿ ವೆಂಕಟೇಶ್ ಪಿ. ದಳವಾಯಿ ಅವರು ೧೯೭೩ರ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ ೩೨೧ರ ಅಡಿಯಲ್ಲಿ ಸಾರ್ವಜನಿಕ ಅಭಿಯೋಜಕರಿಗೆ ನೀಡಲಾದ ಸ್ವತಂತ್ರ ವಿವೇಚನೆಯನ್ನು ಕಾರ್ಯಾಂಗವು ಅನುಚಿತವಾಗಿ ವಹಿಸಿಕೊಂಡಿದೆ ಎಂದು ವಾದಿಸಿದರು. ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ಯಾವುದೇ ನಿಜವಾದ ಸಾರ್ವಜನಿಕ ಹಿತಾಸಕ್ತಿಯನ್ನು ಆಧರಿಸಿಲ್ಲ ಎಂದು ಅವರು ವಾದಿಸಿದರು.
ರಾಜ್ಯದ ಮೂವರು ಹಿರಿಯ ಸಚಿವರ ನೇರ ಶಿಫಾರಸಿನ ಮೇರೆಗೆ ನಿಯಮಗಳನ್ನು ಗಾಳಿಗೆ ತೂರಿ ಈ ಕೇಸ್ಗಳನ್ನು ಕೈಬಿಡಲಾಗಿದೆ. ಹೂಡಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಪ್ರಾಸಿಕ್ಯೂಷನ್ನಿಂದ ಹಿಂಪಡೆಯುವ ಸರ್ಕಾರದ ಈ ನಿಲುವು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ೨೦೨೫ರಲ್ಲಿ ಹೈಕೋರ್ಟ್ ನೀಡಿದ್ದ ಕಟ್ಟುನಿಟ್ಟಿನ ಆದೇಶಕ್ಕೆ ಸಂಪೂರ್ಣ ತದ್ವಿರುದ್ಧವಾಗಿದೆ. ಇದು ಕೇವಲ ರಾಜಕೀಯ ದುರುದ್ದೇಶದಿಂದ ಕೂಡಿದ ತೀರ್ಮಾನ ಎಂದು ಸಹ ವಾದಿಸಿದರು.
ಗೃಹ ಸಚಿವ ಖರ್ಗೆ ಪ್ರತಿಕ್ರಿಯೆ:
ಆಳಂದ್ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕುರಿತು ರಾಜ್ಯದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಕ್ರಿಯಿಸಿ, ಸರ್ಕಾರವು ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸುವುದಕ್ಕೆ ಮೊದಲು ಆದೇಶವನ್ನು ಅಧ್ಯಯನ ಮಾಡುತ್ತದೆ ಎಂದು ಹೇಳಿದರು.
ನ್ಯಾಯಾಲಯದ ಆದೇಶದ ಪ್ರತಿಯನ್ನು ಪಡೆದ ನಂತರ ನಾವು ಈ ವಿಷಯದ ಬಗ್ಗೆ ಚರ್ಚಿಸುತ್ತೇವೆ. ಈ ಪಟ್ಟಿಯಲ್ಲಿ ಬಿಜೆಪಿ ನಾಯಕರಿಗೆ ಸಂಬಂಧಿಸಿದ ಪ್ರಕರಣಗಳೂ ಸೇರಿವೆ. ಕಾನೂನಿನ ವ್ಯಾಪ್ತಿಯನ್ನು ಮೀರಿ ನಾವು ಯಾವುದೇ ಆದೇಶವನ್ನು ಹೊರಡಿಸಿಲ್ಲ. ಕಾನೂನು ಚೌಕಟ್ಟಿನೊಳಗೆ ಸಚಿವ ಸಂಪುಟವು ಈ ನಿರ್ಧಾರವನ್ನು ಕೈಗೊಂಡಿದೆ. ಹಿಂದಿನ ಸರ್ಕಾರಗಳ ರೀತಿಯಲ್ಲಿಯೇ ರಾಜ್ಯ ಸರ್ಕಾರವೂ ಸಹ ಕಾನೂನಿನ ಅಡಿಯಲ್ಲಿಯೇ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಇದೊಂದು ಮಹತ್ವದ ಬೆಳವಣಿಗೆಯಾಗಿದ್ದು, ಹೈಕೋರ್ಟ್ನ ಮಧ್ಯಂತರ ತಡೆಯಾಜ್ಞೆಯು ಮುಂದಿನ ವಿಚಾರಣೆ ನಡೆಯುವವರೆಗೆ ಒಟ್ಟು ೫೨ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಹಿಂದೂ ಮುಖಂಡರ ಹರ್ಷ:
ಆಳಂದ್ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿದಂತೆ ೫೨ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದನ್ನು ಶ್ರೀರಾಮ್ ಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹಾಗೂ ಬಿಜೆಪಿ ಮುಖಂಡರೂ ಆಗಿರುವ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾನಂದ್ ಗುತ್ತೇದಾರ್ ಅವರೂ ಸೇರಿದಂತೆ ಅನೇಕರು ಸ್ವಾಗತಿಸಿದ್ದಾರೆ. ಈ ಕುರಿತ ಗಿರೀಶ್ ಭಾರದ್ವಾಜ್ ಅವರಿಗೆ ಅವರು ಅಭಿನಂದಿಸಿದ್ದಾರೆ.



