ಮನರಂಜನೆ
‘ಪುಷ್ಪ 2’ ಪ್ರದರ್ಶನದ ವೇಳೆ ನಡೆದ ಕಾಲ್ತುಳಿತ ಪ್ರಕರಣ; ನ್ಯಾಯಾಲಯಕ್ಕೆ ಆನ್ಲೈನ್ ಮೂಲಕ ಹಾಜರಾದ ಅಲ್ಲು ಅರ್ಜುನ್
ಹೈದರಾಬಾದ್ ನ್ಯಾಯಾಲಯದಲ್ಲಿ ವಿಚಾರಣೆ; ಜುಲೈ 29ಕ್ಕೆ ಮುಂದೂಡಿದ ಪ್ರಕರಣ

ಕಳೆದ ವರ್ಷ ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ‘ಪುಷ್ಪ 2’ ಚಿತ್ರದ ವಿಶೇಷ ಪ್ರದರ್ಶನದ ವೇಳೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಸೋಮವಾರ ನ್ಯಾಯಾಲಯಕ್ಕೆ ಆನ್ಲೈನ್ ಮೂಲಕ ಹಾಜರಾದರು.
ನಾಂಪಲ್ಲಿ ಅಪರಾಧ ನ್ಯಾಯಾಲಯದಲ್ಲಿ ನಡೆದ ವಿಚಾರಣೆಗೆ ಅಲ್ಲು ಅರ್ಜುನ್ ದೃಶ್ಯ ಸಂವಹನದ ಮೂಲಕ ಹಾಜರಾದರೆ, ಪ್ರಕರಣದ ಇತರ ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಅವರು ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ನಟನ ಕಾನೂನು ತಂಡ ತಿಳಿಸಿದೆ.
ಪ್ರಕರಣದಲ್ಲಿ ಎಲ್ಲಾ ಆರೋಪಿಗಳು ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿದೆ.
ಕಳೆದ ವರ್ಷ ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಘಟನೆ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.



