ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರಕ್ಕೆ ಕಲಬುರಗಿಯ ಏಳು ವಿದ್ಯಾರ್ಥಿಗಳ ಆಯ್ಕೆ
ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ; ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಸಾಧನೆ

ಬೆಂಗಳೂರು, ಜುಲೈ ೧೩: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಘಟಕದಿಂದ ಪ್ರತಿ ವರ್ಷ ನೀಡಲಾಗುವ ರಾಜ್ಯ ಪುರಸ್ಕಾರ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಏಳು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ರಾಜ್ಯ ಮಟ್ಟದಲ್ಲಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಅಪ್ಪಾ ಸಾರ್ವಜನಿಕ ಶಾಲೆಯ ವಿದ್ಯಾರ್ಥಿನಿ ಅನುಷ್ಕಾ ವಾಯ್ ಅಷಗಿ, ಚಂದ್ರಕಾಂತ ಪಾಟೀಲ ಆಂಗ್ಲ ಮಾಧ್ಯಮ ಶಾಲೆಯ ಸಮೃದ್ಧಿ ಎಸ್. ಪಾಟೀಲ, ಅನಮೋಲ ಎಂ. ಪೂಜಾರಿ, ಯೋಗೇಶ್, ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಮಂಜೇಶ್ವರಿ, ಸರ್ಕಾರಿ ಪದವಿ ಕಾಲೇಜಿನ ವಿದ್ಯಾಶ್ರೀ ಹಾಗೂ ಅಪ್ಪಾ ಸಾರ್ವಜನಿಕ ಶಾಲೆಯ ವಿದ್ಯಾರ್ಥಿನಿ ನಿಧಿ ತಿವಾರಿ ರಾಜ್ಯ ಪುರಸ್ಕಾರ ಪ್ರಶಸ್ತಿ ಪಡೆದಿದ್ದಾರೆ.
ಪ್ರಶಸ್ತಿಯನ್ನು ಆರೋಗ್ಯ ಸಚಿವರು ಹಾಗೂ ರಾಜ್ಯದ ಮುಖ್ಯ ಆಯುಕ್ತರು ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಡಾ. ಪಿ.ಜಿ.ಆರ್. ಸಿಂಧಿಯಾ ಸೇರಿದಂತೆ ರಾಷ್ಟ್ರೀಯ, ರಾಜ್ಯ ಹಾಗೂ ವಿವಿಧ ಹಂತಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕಲಬುರಗಿ ಜಿಲ್ಲಾ ಆಯುಕ್ತ ಎಸ್.ಪಿ. ಸುಳ್ಳದ್, ಜಿಲ್ಲಾ ಕಾರ್ಯದರ್ಶಿ ಪೀರಪ್ಪ ಹೂಗೋಂಡ, ಜಿಲ್ಲಾ ಜಂಟಿ ಕಾರ್ಯದರ್ಶಿ ರಾಜಕುಮಾರ ಮರಾಠೆ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರ ಪ್ರಶಸ್ತಿ ಪಡೆದು ಜಿಲ್ಲೆಯ ಹೆಗ್ಗಳಿಕೆಯನ್ನು ಹೆಚ್ಚಿಸಿದ್ದಾರೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ದಾಕ್ಷಾಯಿಣಿ ಎಸ್. ಅಪ್ಪಾ, ಕಾರ್ಯದರ್ಶಿ ಬಸವರಾಜ ದೇಶಮುಖ, ಸಂಸ್ಥೆಯ ಆಡಳಿತಾಧಿಕಾರಿ ಡಾ. ಅಲ್ಲಮಪ್ರಭು ದೇಶಮುಖ ಹಾಗೂ ಅಪ್ಪಾ ಸಾರ್ವಜನಿಕ ಶಾಲೆಯ ಪ್ರಾಂಶುಪಾಲ ಶಂಕರಗೌಡ ಹೊಸಮನಿ ಅವರು ಪ್ರಶಸ್ತಿ ಪಡೆದ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದರು.



