ಫೋನ್ಪೇ ಮೂಲಕ ಲಂಚ ಸ್ವೀಕಾರ ಆರೋಪ: ಯಾದಗಿರಿ ಆರೋಗ್ಯ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ
₹20 ಸಾವಿರ ಹಣ ಡಿಜಿಟಲ್ ವರ್ಗಾವಣೆ ವೇಳೆ ಕಾರ್ಯಾಚರಣೆ; ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ಆರಂಭ

ಫೋನ್ಪೇ ಮೂಲಕ ಲಂಚ ಸ್ವೀಕರಿಸಿದ ಆರೋಪದ ಮೇಲೆ ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀಕಾಂತ್ ಭಾವಿಮನಿ ಅವರು ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಚಿತಲಿ ಗ್ರಾಮದ ರೈತ ಸಿದ್ದಣ್ಣ ಜಮಾದಾರ ಅವರ ರಾಷ್ಟ್ರೀಯ ಗುಣಮಟ್ಟ ಖಾತ್ರಿ ಕಾರ್ಯಕ್ರಮದಡಿ ಮಂಜೂರಾಗಿದ್ದ ₹1,39,750 ಪ್ರೋತ್ಸಾಹಧನವನ್ನು ಖಾತೆಗೆ ಜಮಾ ಮಾಡಿಕೊಡುವ ಸಂಬಂಧ, ಶೇ.20ರಷ್ಟು ಕಮಿಷನ್ ನೀಡುವಂತೆ ಅಧಿಕಾರಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಸಂಬಂಧ ದೂರುದಾರರಿಂದ ₹20,000 ಹಣವನ್ನು ಫೋನ್ಪೇ ಮೂಲಕ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಲೆಗೆ ಬೀಳಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ಜೆ.ಎಚ್. ಇನಾಮದಾರ್ ಹಾಗೂ ಪೊಲೀಸ್ ನಿರೀಕ್ಷಕ ಸಿದ್ದರಾಯ ಬಾಳೂರ್ಗಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದೆ.



