ಮಹಿಳಾ, ಮಕ್ಕಳ ಕಲ್ಯಾಣ ಯೋಜನೆಗಳು ಕಾಗದಕ್ಕಷ್ಟೇ ಸೀಮಿತವಾಗದಿರಲಿ: ಇಕ್ರಂ ಶರೀಫ್
ಜಾಗೃತಿ ಕಾರ್ಯಕ್ರಮಗಳಲ್ಲಿ ಕನಿಷ್ಠ 100ಕ್ಕೂ ಹೆಚ್ಚು ಜನರ ಭಾಗವಹಿಸುವಿಕೆ ಕಡ್ಡಾಯ; ಸಾಂತ್ವನ ಕೇಂದ್ರ, ಶಕ್ತಿ ಸದನಗಳಲ್ಲಿ ಪಾರದರ್ಶಕತೆಗೆ ಒತ್ತು

ಕಲಬುರಗಿ, ಆ.13: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನೆಗಳು ಕೇವಲ ಕಾಗದದ ವರದಿಗಳಿಗೆ ಸೀಮಿತವಾಗದೆ ಅರ್ಹ ಫಲಾನುಭವಿಗಳಿಗೆ ನೇರವಾಗಿ ತಲುಪಬೇಕು. ಜಾಗೃತಿ ಕಾರ್ಯಕ್ರಮಗಳು ಸಭಾಂಗಣಕ್ಕೆ ಸೀಮಿತವಾಗದೆ ಜನಸಾಮಾನ್ಯರ ಭಾಗವಹಿಸುವಿಕೆಯೊಂದಿಗೆ ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಹಾಗೂ ಶಾಲಾ-ಕಾಲೇಜು ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ಜಾಗೃತಿ ಕಾರ್ಯಕ್ರಮಗಳಲ್ಲಿ ಕೇವಲ ಕಾಗದದ ವರದಿ ಸಿದ್ಧಪಡಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದರು.
ಪ್ರತಿ ಜಾಗೃತಿ ಕಾರ್ಯಕ್ರಮದಲ್ಲಿ ಕನಿಷ್ಠ 100ಕ್ಕೂ ಹೆಚ್ಚು ಸಾರ್ವಜನಿಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸುವಂತೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವೈಯಕ್ತಿಕ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ತಮ್ಮ ಕಾರ್ಯಕ್ರಮಗಳ ನೈಜತೆಯನ್ನು ದೃಢಪಡಿಸಲು ಜಿಪಿಎಸ್ ಆಧಾರಿತ ಸಮಯ ಮತ್ತು ದಿನಾಂಕ ನಮೂದಿಸಿರುವ ಛಾಯಾಚಿತ್ರಗಳೊಂದಿಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಅಧಿಕಾರಿಗಳ ದೈನಂದಿನ ಹಾಜರಾತಿಯನ್ನು ‘ಕರ್ತವ್ಯ’ ಆ್ಯಪ್ನಲ್ಲಿ ನಿಖರವಾಗಿ ದಾಖಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಸಾಂತ್ವನ ಕೇಂದ್ರಗಳು ಹಾಗೂ ‘ಶಕ್ತಿ ಸದನ’ಗಳ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಮುಂದಿನ 15 ದಿನಗಳೊಳಗಾಗಿ ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಸಿಸಿಟಿವಿ ಲೈವ್ಸ್ಟ್ರೀಮಿಂಗ್ ಅನ್ನು ಮೇಲಾಧಿಕಾರಿಗಳ ಮೊಬೈಲ್ಗೆ ಸಂಪರ್ಕಿಸದ ಕೇಂದ್ರಗಳ ಅನುದಾನವನ್ನು ತಡೆಹಿಡಿಯಲಾಗುವುದು ಎಂದು ಎಚ್ಚರಿಸಿದರು.
ಪ್ರಸ್ತುತ ಖಾಸಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಸ್ವಧಾರ ಗೃಹ’ವನ್ನು ತಕ್ಷಣವೇ ಸೂಕ್ತ ಸರ್ಕಾರಿ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆದೇಶಿಸಿದರು. ಇದರಿಂದ ಸರ್ಕಾರಿ ಹಣ ಉಳಿತಾಯವಾಗುವುದರ ಜೊತೆಗೆ ನಿವಾಸಿಗಳಿಗೆ ಉತ್ತಮ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸಲು ಸಾಧ್ಯವಾಗಲಿದೆ ಎಂದರು.
ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಶಾರೀರಿಕ ಬೆಳವಣಿಗೆ ಹಾಗೂ ಅಪೌಷ್ಟಿಕತೆಯನ್ನು ಅಳೆಯಲು ಬಳಸುವ ತೂಕದ ಯಂತ್ರಗಳು, ಸ್ಟೇಡಿಯೋಮೀಟರ್ ಮತ್ತು ಇನ್ಫಾಂಟೋಮೀಟರ್ಗಳ ಸ್ಥಿತಿಗತಿಯನ್ನು ಪರಿಶೀಲಿಸಬೇಕು. ಕೆಟ್ಟುಹೋಗಿರುವ ಉಪಕರಣಗಳ ಪಟ್ಟಿ ಸಿದ್ಧಪಡಿಸಿ, ಹೊಸ ಉಪಕರಣಗಳ ಖರೀದಿಗೆ ಅಗತ್ಯ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಸಹಾಯವಾಣಿ 181 ಹಾಗೂ ಮಕ್ಕಳ ಸಹಾಯವಾಣಿ 1098 ಕುರಿತು ಗ್ರಾಮೀಣ ಭಾಗದಲ್ಲಿ ವ್ಯಾಪಕ ಅರಿವು ಮೂಡಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ, ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರ ಪೌಷ್ಟಿಕಾಂಶ ಮತ್ತು ಆರೋಗ್ಯ ಸುಧಾರಣೆಗಾಗಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಜಾರಿಯಲ್ಲಿದೆ ಎಂದರು. ಯೋಜನೆಯಡಿ ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ಒಟ್ಟು ₹5,000 ಹಾಗೂ ಎರಡನೇ ಮಗು ಹೆಣ್ಣಾಗಿದ್ದರೆ ಒಂದೇ ಕಂತಿನಲ್ಲಿ ₹6,000 ಧನಸಹಾಯ ನೀಡಲಾಗುತ್ತದೆ. ಈ ಮೊತ್ತ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಸರ್ಕಾರಿ ನೌಕರರು ಹಾಗೂ ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಉಳಿದ ಅರ್ಹ ಮಹಿಳೆಯರು ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಸೇಡಂ ಉಪವಿಭಾಗದ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ್, ಡಿಯುಡಿಸಿ ಯೋಜನಾ ನಿರ್ದೇಶಕ ಮುನ್ನವರ ದೌವಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ್ ರಾಠೋಡ, ಡಿಎಚ್ಒ ಡಾ. ಶರಣಬಸಪ್ಪ ಕ್ಯಾತ್ನಾಳ, ಜಿಲ್ಲಾ ಸರ್ಜನ್ ರೂಕಿಯ್ಯ ಅಸ್ನ ರಬಾ, ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶರಣಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಿಡಿಪಿಒಗಳು, ಎನ್ಜಿಒ ಪ್ರತಿನಿಧಿಗಳು ಹಾಗೂ ವಿವಿಧ ಯೋಜನೆಗಳ ಮಿಷನ್ ಕೋಆರ್ಡಿನೇಟರ್ಗಳು ಉಪಸ್ಥಿತರಿದ್ದರು.



