ರಾಜಕೀಯ

ಉತ್ತರಾಖಂಡದಲ್ಲಿ ಖರ್ಗೆ ಅವರಿಗೆ ಅವಮಾನ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಜಾತಿ ಆಧಾರಿತ ಅಸ್ಪೃಶ್ಯತೆ ಆಚರಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕಲಬುರಗಿ, ಆ.22: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಕೆಲವು ಕೋಮುವಾದಿ ಸಂಘಟನೆಗಳು ಶುದ್ಧೀಕರಿಸಿ ಹೋಮ-ಹವನ ನಡೆಸಿದ ಘಟನೆ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ವತಿಯಿಂದ ಶುಕ್ರವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಜಗತ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಈ ವೇಳೆ ಪ್ರತಿಭಟನಾಕಾರರು ಜಾತಿ ಆಧಾರಿತ ಅಸ್ಪೃಶ್ಯತೆ ಆಚರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಅಸ್ಪೃಶ್ಯತೆ ಆಚರಿಸಿದ ಸಂಘಟನೆಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಿ.ಜಿ. ಸಾಗರ್ ಮಾತನಾಡಿ, ಇತ್ತೀಚೆಗೆ ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದರು. ಬಳಿಕ ಕೆಲವು ಕೋಮುವಾದಿ ಸಂಘಟನೆಗಳು ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿ ಹೋಮ-ಹವನ ನಡೆಸಿರುವುದು ಜಾತಿ ಆಧಾರಿತ ಅಸ್ಪೃಶ್ಯತೆಯ ಆಚರಣೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಸಂವಿಧಾನ ಜಾರಿಗೆ ಬಂದು 77 ವರ್ಷಗಳು ಕಳೆದರೂ ದೇಶದಲ್ಲಿ ಅಸ್ಪೃಶ್ಯತೆ ಜೀವಂತವಾಗಿರುವುದು ವಿಷಾದನೀಯ. ಜಾತಿಯ ಆಧಾರದ ಮೇಲೆ ನಡೆಯುವ ಇಂತಹ ಅಮಾನವೀಯ ಆಚರಣೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜಾತಿ ವ್ಯವಸ್ಥೆಯಲ್ಲಿ ವಂಚಿತ ಸಮುದಾಯದಿಂದ ಬಂದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ತ್ಯಾಗ, ಹೋರಾಟ ಹಾಗೂ ಪ್ರಾಮಾಣಿಕತೆಯಿಂದ ರಾಷ್ಟ್ರದ ಪ್ರಮುಖ ನಾಯಕರಾಗಿ ಬೆಳೆದಿದ್ದಾರೆ. ಅಂತಹ ನಾಯಕನ ಮನೋಸ್ಥೈರ್ಯ ಕುಗ್ಗಿಸುವ ಉದ್ದೇಶದಿಂದ ನಡೆಸಿರುವ ಕೃತ್ಯ ಖಂಡನೀಯ. ಇದು ಕೇವಲ ಖರ್ಗೆ ಅವರಿಗೆ ಮಾಡಿದ ಅವಮಾನವಲ್ಲ, ದೇಶದ ಶೋಷಿತ ಸಮುದಾಯ ಹಾಗೂ ಸಂವಿಧಾನ ಮತ್ತು ಕಾನೂನು ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ ಎಂದು ಹೇಳಿದರು.

ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿ ಹೋಮ-ಹವನ ನಡೆಸಿದವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, 1989 ಹಾಗೂ ಅಸ್ಪೃಶ್ಯತೆ ಆಚರಣೆ ವಿರೋಧಿ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂವಿಧಾನವು ಅಸ್ಪೃಶ್ಯತೆಯ ಆಚರಣೆಯನ್ನು ನಿಷೇಧಿಸಿದೆ. ದೇಶದ ಆಡಳಿತ ಮತ್ತು ಸಾಮಾಜಿಕ ವ್ಯವಸ್ಥೆಗಳು ಸಂವಿಧಾನದ ಆಶಯಗಳ ಆಧಾರದ ಮೇಲೆ ನಡೆಯಬೇಕು. ಆದರೆ ಇಂತಹ ಘಟನೆಗಳು ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತಿದ್ದು, ಮನುವಾದಿ ಮತ್ತು ಜಾತಿವಾದಿ ಮನೋಭಾವಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಪ್ರತಿಭಟನೆಯಲ್ಲಿ ಸಮಿತಿಯ ರಾಜ್ಯ ಖಜಾಂಚಿ ಬಿ.ಸಿ. ವಾಲಿ, ಜಿಲ್ಲಾ ಮುಖಂಡರಾದ ಸುರೇಶ್ ಹಾದಿಮನಿ, ಎಸ್.ಪಿ. ಸುಳ್ಳದ, ರೇವಣಸಿದ್ದ ಜಾಲಿ, ಎಚ್. ಶಂಕರ, ಪ್ರಕಾಶ ಮೂಲಭಾರತಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button