ಮಹಿಳೆಯರಿಗೆ ಸಚಿವ ಸ್ಥಾನ ನೀಡದ ಸರ್ಕಾರ: ಡಿ.ಕೆ. ಶಿವಕುಮಾರ್ ವಿರುದ್ಧ ಚಂದ್ರಕಲಾ ಕಿಡಿ
ಮಹಿಳಾ ಮೀಸಲಾತಿ ಹಾಗೂ ಸಮಾನತೆಯ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರದ ನಡೆಗೆ ಆಕ್ರೋಶ

ಜೇವರ್ಗಿ, ಆ.8– ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹಿಳೆಯರಿಗೆ ಸಚಿವ ಸ್ಥಾನ ನೀಡದೆ ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಪ್ರಜಾ ಶಕ್ತಿ ಸಮಿತಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಚಂದ್ರಕಲಾ ಡಿ. ವಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಸರ್ಕಾರ ಸಂವಿಧಾನದ ಅಡಿಯಲ್ಲಿ ನಡೆಯುತ್ತದೆ. ಎಲ್ಲರಿಗೂ ಸಮಾನತೆ ನೀಡುವುದೇ ಕಾಂಗ್ರೆಸ್ ಪಕ್ಷದ ನಿಲುವು ಎಂದು ಹೇಳುವ ನಾಯಕರು ಇದೀಗ ಮಹಿಳೆಯರಿಗೆ ಸಚಿವ ಸ್ಥಾನ ನೀಡದಿರುವ ಕ್ರಮದ ಬಗ್ಗೆ ಏನು ಹೇಳುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ.
ಮಹಿಳೆಯರ ಪರ ಸರ್ಕಾರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷದ ಪರ ವಾದಿಸುವ ಬುದ್ಧಿಜೀವಿಗಳು ಈಗ ಎಲ್ಲಿದ್ದಾರೆ? ಮಹಿಳೆಯರಿಗೆ ಸಂವಿಧಾನದಲ್ಲಿ ಸಮಾನ ಹಕ್ಕುಗಳನ್ನು ನೀಡಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಚಂದ್ರಕಲಾ ಟೀಕಿಸಿದ್ದಾರೆ.
ಮಹಿಳೆಯರಿಗೆ ಸಚಿವ ಸ್ಥಾನ ನೀಡದಿರುವುದು ರಾಜ್ಯದ ಮಹಿಳೆಯರಿಗೆ ಮಾಡುತ್ತಿರುವ ಅಗೌರವವಾಗಿದೆ. ಆಡಳಿತದಲ್ಲಿ ಮಹಿಳೆಯರಿಗೂ ಸಮಾನ ಅವಕಾಶ ಕಲ್ಪಿಸಬೇಕಾದ ಸರ್ಕಾರವೇ ಮಹಿಳಾ ಪ್ರತಿನಿಧಿತ್ವವನ್ನು ಕಡೆಗಣಿಸಿರುವುದು ಖಂಡನೀಯ ಎಂದರು.
ಮಹಿಳಾ ಮೀಸಲಾತಿಯನ್ನು ಕಸಿದುಕೊಂಡು ಮಹಿಳೆಯರ ಹಕ್ಕುಗಳನ್ನು ಸರ್ಕಾರ ಮೊಟಕುಗೊಳಿಸುತ್ತಿದೆ ಎಂದು ಆರೋಪಿಸಿದ ಅವರು, ರಾಜ್ಯದ ಮಹಿಳೆಯರು ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.



