ಮೂಲಸೌಕರ್ಯಗಳಿಂದ ವಂಚಿತ ಕಡಕೊಳ ಸರ್ಕಾರಿ ಪ್ರೌಢಶಾಲೆ; ವಿದ್ಯಾರ್ಥಿಗಳ ಪರದಾಟ
ಕುಡಿಯುವ ನೀರು, ವಿದ್ಯುತ್, ಶೌಚಾಲಯ ಹಾಗೂ ಶಿಕ್ಷಕರ ಕೊರತೆ ನಿವಾರಣೆಗೆ ಒತ್ತಾಯ; ಇಲ್ಲದಿದ್ದರೆ ಪ್ರತಿಭಟನೆ ಎಚ್ಚರಿಕೆ

ಯಡ್ರಾಮಿ, ಜುಲೈ ೧೩: ತಾಲ್ಲೂಕಿನ ಕಡಕೊಳ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ನಮ್ಮ ಕರ್ನಾಟಕ ಸೇನೆ ಕಲ್ಯಾಣ ಕರ್ನಾಟಕ ವಿಭಾಗದ ಅಧ್ಯಕ್ಷ ಸುದೀಂದ್ರ ಇಜೇರಿ ಹಾಗೂ ಉಪಾಧ್ಯಕ್ಷ ಸಂತೋಷಗೌಡ ಜಿ. ಮಾಳಿಪಾಟೀಲ ಆರೋಪಿಸಿದರು.
ಶಾಲೆಯಲ್ಲಿ ಎಂಟನೇ, ಒಂಬತ್ತನೇ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕುಡಿಯುವ ನೀರು, ವಿದ್ಯುತ್ ಹಾಗೂ ಶೌಚಾಲಯದಂತಹ ಮೂಲಭೂತ ಸೌಲಭ್ಯಗಳಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಂದರೆ ಉಂಟಾಗುತ್ತಿದೆ ಎಂದು ಅವರು ಹೇಳಿದರು.
ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ ಅಗತ್ಯ ವಿಷಯಗಳಿಗೆ ಶಿಕ್ಷಕರ ನೇಮಕವಾಗಿಲ್ಲ. ಕೇವಲ ಇಬ್ಬರು ಶಿಕ್ಷಕರಿಂದಲೇ ಶಾಲೆಯ ಎಲ್ಲಾ ತರಗತಿಗಳನ್ನು ನಿರ್ವಹಿಸಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಸಮರ್ಪಕ ಬೋಧನೆ ದೊರೆಯದೆ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದು ದೂರಿದರು.
ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲು ಹೋದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇಂತಹ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಸಂಘಟನೆಯ ಮುಖಂಡರ ಮುಂದೆ ವಿವರಿಸಿದ್ದು, ಇದುವರೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶಾಲೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದರು.
ತಕ್ಷಣವೇ ಅಗತ್ಯ ಶಿಕ್ಷಕರನ್ನು ನೇಮಿಸಿ, ಶಾಲೆಗೆ ಕುಡಿಯುವ ನೀರು, ವಿದ್ಯುತ್, ಶೌಚಾಲಯ ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಬೇಕು. ಬೇಡಿಕೆಗಳನ್ನು ಈಡೇರಿಸದಿದ್ದರೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ಉಪಾಧ್ಯಕ್ಷ ಸಂತೋಷಗೌಡ ಜಿ. ಮಾಳಿಪಾಟೀಲ, ಜೇವರ್ಗಿ ತಾಲ್ಲೂಕು ಅಧ್ಯಕ್ಷ ರವಿ ಪಾಟೀಲ, ಕನ್ನಡಪರ ಹೋರಾಟಗಾರ ಯಲ್ಲಪ್ಪ ದೋರಿ ಜನಿವಾರ, ರಾಹುಲ್ ಸಿಂದಗಿ, ಸಂಘಟನೆಯ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.



